ಬೆಡ್ ನೀಡದಿದ್ದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ ಎಚ್ಚರಿಕೆ
ಬೆಂಗಳೂರು, ಸೆ.24: ಮುಂದಿನ 48 ಗಂಟೆಯೊಳಗೆ ಸರಕಾರಿ ಮತ್ತು ಬಿಬಿಎಂಪಿ ಕೋಟಾದಡಿಯ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಬೆಡ್ಗಳನ್ನು ಮೀಸಲಿಡಬೇಕು. ಇಲ್ಲವಾದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕೆಲ ಖಾಸಗಿ ಆಸ್ಪತ್ರೆಗಳು ಸರಕಾರದ ಆದೇಶವನ್ನು ಈವರೆಗೂ ಪಾಲಿಸದೇ ಇರುವುದು ಗೊತ್ತಾಗಿದೆ. ನಗರದಲ್ಲಿ ದಿನೇ ದಿನೇ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳದಿಂದ ಸರಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಬೆಡ್ಗಳ ಕೊರತೆ ಉಂಟಾಗಿರುವ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣೆ-2005ರ ಕಾಯ್ದೆಯ ಆದೇಶದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಒಟ್ಟಾರೆ ಬೆಡ್ಗಳ ಪೈಕಿ ಶೇ.50ರಷ್ಟು ಪ್ರಮಾಣದ ಬೆಡ್ಗಳನ್ನು ಸರಕಾರಿ ಕೋಟಾದ ರೋಗಿಗಳಿಗೆ ಮೀಸಲಿಡದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು.
ಅಲ್ಲದೆ, ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಗಳಲ್ಲಿರುವ ಒಟ್ಟು ಬೆಡ್ಗಳ ಪೈಕಿ ಸರಕಾರಿ ಕೋಟಾದ ರೋಗಿಗಳಿಗೆ ಮೀಸಲಿಟ್ಟ ಬೆಡ್ಗಳ ಮಾಹಿತಿಯನ್ನು ಬಿಬಿಎಂಪಿ ಆಯುಕ್ತರಿಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಖಾಸಗಿ ಆಸ್ಪತ್ರೆಗಳು ಒಂದು ವೇಳೆ ಇದನ್ನು ಪಾಲಿಸಲು ವಿಫಲವಾದ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ-2017ರ ಸೆಕ್ಷನ್ 15ರಡಿ ಆ ಆಸ್ಪತ್ರೆಯ ನೋಂದಣಿ ರದ್ದು, ದಂಡ, ಸಜೆ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಆಸ್ಪತ್ರೆಯಲ್ಲಿರುವ ಒಟ್ಟು ಬೆಡ್ಗಳು ಅದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಮತ್ತು ಸರಕಾರಿ ಕೋಟಾದಡಿಯ ರೋಗಿಗಳ ಮಾಹಿತಿಯನ್ನು ಪೋರ್ಟಲ್ನಲ್ಲಿ ಪ್ರಕಟಿಸಬೇಕು ಎಂದು ನಿರ್ದೇಶಿಸಲಾಗಿದೆ.