ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ
ಬೆಂಗಳೂರು, ಎ.7: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಕಾರಾಗೃಹಕ್ಕೆ ಕಳುಹಿಸುವ ಮೂಲಕ ಖಡಕ್ ನ್ಯಾಯಾಧೀಶರೆಂದೇ ಹೆಸರಾದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸೇವೆಯಿಂದ ನಿವೃತ್ತರಾದರು. ಅವರಿಗೆ ಬೆಂಗಳೂರು ವಕೀಲರ ಸಂಘದಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು.
ಹೈಕೋರ್ಟ್ ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಸೇರಿ ಹೈಕೋರ್ಟ್ ನ ನ್ಯಾಯಮೂರ್ತಿಗಳು, ವಕೀಲರು, ಸಂಘದ ಪದಾಧಿಕಾರಿಗಳು ಹಾಗೂ ನ್ಯಾ. ಕುನ್ಹಾ ಕುಟುಂಬದ ಸದಸ್ಯರು ಹಾಜರಿದ್ದರು.
ಮುಖ್ಯ ನ್ಯಾಯಮೂರ್ತಿ ಓಕ ಮಾತನಾಡಿ, ನ್ಯಾ. ಕುನ್ಹಾ 5 ಸಾವಿರಕ್ಕೂ ಅಧಿಕ ಪ್ರಕರಣ ವಿಲೇವಾರಿ ಮಾಡಿದ್ದಾರೆ. ಜಿಲ್ಲಾ ನ್ಯಾಯಾಧೀಶರಾಗಿ, ಹೈಕೋರ್ಟ್ ರಿಜಿಸ್ಟ್ರಾರ್ ಆಗಿ ಮತ್ತು ಹೈಕೋರ್ಟ್ ನ್ಯಾಯಮೂರ್ತಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮಾತನಾಡಿ, ನ್ಯಾಯಾಂಗಕ್ಕೆ ಸವಾಲಾಗಿದ್ದ ಜಯಲಲಿತಾ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ್ದ ನ್ಯಾ. ಕುನ್ಹಾ, ಡಿನೋಟಿಫಿಕೇಷನ್, ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿಯ ಪ್ರಕರಣಗಳಲ್ಲಿ ರಾಜಕಾರಣಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದರು ಎಂದು ಪ್ರಶಂಸಿಸಿದರು.