ಕೆ.ಎ.ಪಿ. ಭಟ್
ಉಡುಪಿ, ಎ.8: ನಿವೃತ್ತ ಶಿಕ್ಷಕ ಕೆ.ಅನಂತಪದ್ಮನಾಭ ಭಟ್ (83) ಇಂದು ಬೆಳಗ್ಗೆ ನಿಧನ ಹೊಂದಿದರು. ಇವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಶಿಷ್ಯ ಸಮುದಾಯವನ್ನು ಅಗಲಿದ್ದಾರೆ.
ಕೆ.ಎ.ಪಿ.ಭಟ್ ಅವರು ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆಗೆ ಸೇರಿ, ನಿಟ್ಟೂರು ಪ್ರೌಢಶಾಲೆಯಲ್ಲಿ ಅಧ್ಯಾಪಕ ಹಾಗೂ ಮುಖ್ಯೋಪಾಧ್ಯಾಯರಾಗಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು. ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾಗಿ ಅವರು ಶಾಲಾಭಿವೃದ್ಧಿಗೆ ಶ್ರಮಿಸಿದ್ದರು. ಉತ್ತಮ ವಾಲಿಬಾಲ್ ಕ್ರೀಡಾಪಟುವಾಗಿದ್ದ ಭಟ್, ನಾಟಕದಲ್ಲಿ ನಟನೆ ಮತ್ತು ನಿರ್ದೇಶನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು.
ಅನಂತ ಪದ್ಮನಾಭ ಭಟ್ ಇವರ ನಿಧನಕ್ಕೆ ನಿಟ್ಟೂರು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್ ಮತ್ತು ಮುಖ್ಯೋಪಾಧ್ಯಾಯರು ಅಧ್ಯಾಪಕ ವೃಂದ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ಚಂದ್ರಾಧರ್ ಸಂತಾಪ ವ್ಯಕ್ತಪಡಿಸಿದ್ದಾರೆ.