ಜಿಪಂ, ತಾಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಎಸ್ಡಿಪಿಐ ನಿರ್ಧಾರ
ಮಂಗಳೂರು, ಎ.10: ಮುಂದಿನ ದಿನಗಳಲ್ಲಿ ದ.ಕ.ಜಿಲ್ಲೆಯಲ್ಲಿ ನಡೆಯುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಸ್ಪರ್ಧಿಸಲು ಎಸ್ಡಿಪಿಐ ನಿರ್ಧರಿಸಿದೆ.
ಪಕ್ಷದ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಪಕ್ಷದ ಕಚೇರಿಯಲ್ಲಿ ನಡೆದ ದ.ಕ. ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸುವ ಬಗ್ಗೆ ವಿಶೇಷ ಕಾರ್ಯಯೋಜನೆಯನ್ನು ಹಾಕಲಾಯಿತು. ಇಂದಿನ ರಾಜಕೀಯ ಸನ್ನಿವೇಶದಲ್ಲಿ ದೇಶದಲ್ಲಿ ಎಸ್ಡಿಪಿಐ ಪಕ್ಷದ ಅನಿವಾರ್ಯತೆಯನ್ನು ಎಲ್ಲಾ ವರ್ಗದ ನಾಗರಿಕರಿಗೆ ತಲುಪಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸದಸ್ಯರನ್ನು ಸೇರ್ಪಡೆಗೊಳಿಸುವ ನಿರ್ಧಾರವನ್ನು ಸಭೆಯು ಕೈಗೊಂಡಿತು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್, ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್, ಕಾರ್ಯದರ್ಶಿಗಳಾದ ಅನ್ವರ್ ಸಾದತ್ ಬಜತ್ತೂರು, ಅಶ್ರಫ್ ಮಂಚಿ, ಜಮಾಲ್ ಜೋಕಟ್ಟೆ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.