ಮೈಸೂರು ಜಿಲ್ಲಾಧಿಕಾರಿ ಸರಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ: ಪ್ರಾದೇಶಿಕ ಆಯುಕ್ತರಿಂದ ತನಿಖಾ ವರದಿ ಸಲ್ಲಿಕೆ
ರೋಹಿಣಿ ಸಿಂಧೂರಿ
ಮೈಸೂರು,ಜೂ.22: ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ನಿರ್ಮಿಸಿದ್ದ ಈಜುಕೊಳ ನಿರ್ಮಾಣ ಕುರಿತಂತೆ ಮೈಸೂರು ಪ್ರಾದೇಶಿಕ ಆಯುಕ್ತರು ತನಿಖಾ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈಜುಕೊಳ ನಿರ್ಮಾಣದಲ್ಲಿ ಆಗಿರುವ ಪ್ರಮುಖ ನ್ಯೂನತೆಗಳನ್ನು ವರದಿಯಲ್ಲಿ ನಮೂದಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ. ಗಳಿಗೆ ಅಂದಾಜುಪಟ್ಟಿಯನ್ನು ತಯಾರಿಸಿದ್ದು, ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.
ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಪಡೆದಿಲ್ಲ, ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ. ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.