ರಾಜ್ಯ ಸರಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆ ಬಿಡುಗಡೆ: ಸಿಎಂಗೆ ಅಭಿನಂದನೆ
ಬೆಂಗಳೂರು, ಜು 21: `ರಾಜ್ಯ ಸರಕಾರಿ ನೌಕರರಿಗೆ ಜುಲೈ 1ರಿಂದಲೇ ಅನ್ವಯವಾಗುವಂತೆ ಶೇ.11ರಷ್ಟು ತುಟ್ಟಿಭತ್ಯೆ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದು, ಇದರಿಂದ 6 ಲಕ್ಷ ರಾಜ್ಯ ಸರಕಾರಿ ನೌಕರರು, 4.50 ಲಕ್ಷ ಪಿಂಚಣಿದಾರರು, 3 ಲಕ್ಷ ನಿಗಮ, ಮಂಡಳಿಗಳ ನೌಕರರು ಆರ್ಥಿಕ ಸೌಲಭ್ಯ ಪಡೆಯಲಿದ್ದಾರೆ' ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸ್ವಾಮಿ, ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬುಧವಾರ ಈ ಸಂಬಂಧ ಪತ್ರಿಕಾ ಪ್ರಕಟನೆ ನೀಡಿರುವ ಅವರು, `ಆದೇಶದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಇನ್ನು 2-3 ದಿನಗಳಲ್ಲಿ ಆದೇಶ ಹೊರಡಿಸಲಿದ್ದು, ರಾಜ್ಯದ ಎಲ್ಲ ನೌಕರರಿಗೆ ಜುಲೈ 1ರಿಂದ ಮಂಜೂರಾಗುವ ತುಟ್ಟಿಭತ್ಯೆಯು ಮೂಲ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಜನವರಿ 1ರಿಂದ ತಡೆಹಿಡಿಯಲಾಗಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು ಮಂಜೂರು ಮಾಡುವಂತೆ ಸರಕಾರಿ ನೌಕರರ ಸಂಘ, ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಒತ್ತಾಯಿಸಿತ್ತು' ಎಂದು ತಿಳಿಸಿದ್ದಾರೆ.
`ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರಕಾರ ತನ್ನ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಶೇ.11ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿದೆ. ಅದೆ ಮಾದರಿಯಲ್ಲೆ ಸರಕಾರಿ ನೌಕರರಿಗೂ ಶೇ.11ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಲು ಸಂಘವು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುಟ್ಟಿಭತ್ಯೆ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಆದೇಶಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.