ಹಾವೇರಿ ಸಮ್ಮೇಳನವನ್ನು ಮುಂದೂಡುವಂತೆ ಮುಖ್ಯಮಂತ್ರಿಗಳಿಗೆ ಕಸಾಪ ಪತ್ರ
ಡಾ.ಮಹೇಶ ಜೋಶಿ
ಬೆಂಗಳೂರು, ಮೇ 20: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಗದಿತ ದಿನಾಂಕಗಳನ್ನು ಮುಂದೂಡುವಂತೆ ಕೋರಿ ಬಂದ ಮನವಿಗಳನ್ನು ಪರಿಗಣಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಅವರು ಪತ್ರ ಬರೆದಿದ್ದಾರೆ.
ಹಾವೇರಿಯಲ್ಲಿ ಸೆ.23, 24, 25 ರಂದು 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಬೃಹನ್ಮಠದ 20ನೆಯ ಜಗದ್ಗುರುಗಳಾಗಿದ್ದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿ ಅವರ ಶ್ರದ್ಧಾಂಜಲಿ ಸಮಾರಂಭವು ಸೆ.23 ಹಾಗೂ 24ರಂದು ನಡೆಯುತ್ತಿದೆ ಎಂದು ಸಿರಿಗೆರೆಯ ಶ್ರೀ ತರಳುಬಾಳು ಜಗದ್ಗುರು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಪರಿಷತ್ತಿನ ಅಧ್ಯಕ್ಷರಿಗೆ ಪತ್ರ ಕಳಿಸಿದ್ದಾರೆ. ಇದನ್ನು ಪರಿಗಣಿಸಿದ ಕಸಾಪ, ಸೆ.25ಕ್ಕೆ ಮಹಾಲಯ ಅಮಾವಾಸ್ಯೆ ಇರುವುದರಿಂದ ಪಿತೃಪಕ್ಷದಲ್ಲಿ ಸಮ್ಮೇಳನವನ್ನು ನಡೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಿದೆ. ಹಾಗಾಗಿ ನವೆಂಬರ್ ತಿಂಗಳಿನಲ್ಲಿ ಕನ್ನಡ ರಾಜ್ಯೋತ್ಸವ ಇರುವುದರಿಂದ ನ.11, 12 ಹಾಗೂ 13 ರಂದು ಸಮ್ಮೇಳನವನ್ನು ಜರುಗಿಸಬೇಕು ಎಂಬ ಮನವಿಯನ್ನು ಪರಿಗಣಿಸಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.