ಉಮರ್ ಖಾಲಿದ್ ಜಾಮೀನು ಅರ್ಜಿ: ಸಾಕ್ಷಿ ಹೇಳಿಕೆಯ ಕಿರು-ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದ ದಿಲ್ಲಿ ಹೈಕೋರ್ಟ್
Photo: Umar Khalid (Twitter)
ಹೊಸದಿಲ್ಲಿ: ಸಾಕ್ಷಿಯ ಹೇಳಿಕೆ ನಿಜವೇ ಎಂದು ಖಚಿತಪಡಿಸಿಕೊಳ್ಳಲು ಕಿರು-ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ದಿಲ್ಲಿ ಹೈಕೋರ್ಟ್ ಬುಧವಾರ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಪರ ವಕೀಲರಿಗೆ ತಿಳಿಸಿದೆ ಎಂದು Bar and Bench ವರದಿ ಮಾಡಿದೆ.
ಈಶಾನ್ಯ ದಿಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಒಳಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಹಾಗೂ ರಜನೀಶ್ ಭಟ್ನಾಗರ್ ಅವರನ್ನೊಳಗೊಂಡ ಪೀಠವು ಈ ಹೇಳಿಕೆ ನೀಡಿದೆ.
ಫೆಬ್ರವರಿ 23 ಹಾಗೂ 26, 2020 ರ ನಡುವೆ ಈಶಾನ್ಯ ದಿಲ್ಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಹಾಗೂ ಕಾನೂನನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿದ್ದವು. ಹಿಂಸಾಚಾರವು 53 ಜೀವಗಳನ್ನು ಬಲಿ ತೆಗೆದುಕೊಂಡಿತು ಹಾಗೂ ನೂರಾರು ಜನರು ಗಾಯಗೊಂಡಿದ್ದರು.
ಖಾಲಿದ್ ಅವರನ್ನು ಸೆಪ್ಟೆಂಬರ್ 14, 2020 ರಂದು ಬಂಧಿಸಲಾಯಿತು. ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ ಮತ್ತು ಅಂದಿನಿಂದ ಬಂಧನದಲ್ಲಿದ್ದಾರೆ.