ಪ್ರಧಾನಿ ಮೋದಿ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸಿ: ಮೀನಾಕ್ಷಿ ಲೇಖಿ
ಬಿಜೆಪಿ ನಾರಿ ಶಕ್ತಿ ಸಮಾವೇಶ
ಉಡುಪಿ: ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು, ಎಲ್ಲಾ ನಿಟ್ಟಿನಲ್ಲೂ ವಿಶ್ವದ ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಿ ಅವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನೇ ಆಯ್ಕೆ ಮಾಡುವಂತೆ ಕೇಂದ್ರ ವಿದೇಶಾಂಗ ಮತ್ತು ಸಾಂಸ್ಕೃತಿ ಖಾತೆ ರಾಜ್ಯ ಸಚಿವೆ ಹಾಗೂ ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ಕರೆ ನೀಡಿದ್ದಾರೆ.
ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಪ್ಪೂರಿನ ರಾಮಕ್ಷತ್ರಿಯ ಸಭಾಭವನದಲ್ಲಿ ಇಂದು ನಡೆದ ಉಡುಪಿ ವಿಧಾನ ಸಭಾ ಕ್ಷೇತ್ರ ವ್ತಾಪ್ತಿಯ ನಾರಿ ಶಕ್ತಿ ಸಮಾವೇಶವನ್ನು ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರೊಂದಿಗೆ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ದಶಕಗಳಿಗೂ ಅಧಿಕ ಸಮಯದಿಂದ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಿರುವ ಕರಾವಳಿಯ ಜನತೆ ತಾವು ನಿಜವಾಗಿಯೂ ಬುದ್ಧಿವಂತ ರೆಂಬುದನ್ನು ಸಾಬೀತು ಪಡಿಸಿದ್ದಾರೆ ಎಂದರಲ್ಲದೇ, ದೇಶದ ಈಗಿನ ನಿಜವಾದ ಗ್ಯಾರಂಟಿ ಅಂದರೆ ಅದು ಮೋದಿ ಗ್ಯಾರಂಟಿ ಎಂದರು.
ಸಮಾವೇಶದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಶೀಲಾ ಶೆಟ್ಟಿ, ಚುನಾವಣಾ ಅಭಿಯಾನ ಪ್ರಮುಖ್ ಸುಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಕಿರಣ್ ಕುಮಾರ ಬೈಲೂರು, ಚುನಾವಣಾ ಪ್ರಭಾರಿ ಶ್ಯಾಮಲಾ ಎಸ್. ಕುಂದರ್ ಮುಂತಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮುಖಂಡರಾದ ಬಿ.ಎನ್. ಶಂಕರ ಪೂಜಾರಿ, ಧನಂಜಯ ಅಮೀನ್, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಡುಪಿ ಗ್ರಾಮಾಂತರ ನಿಕಟಪೂರ್ವ ಅಧ್ಯಕ್ಷೆ ವೀಣಾ ನಾಯ್ಕ್, ಜಿಲ್ಲಾ ವಕ್ತಾರ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಪ್ರಮುಖರಾದ ನಳಿನಿ ಪ್ರದೀಪ್ರಾವ್, ಅನಿತಾ ಮರವಂತೆ, ದಿನೇಶ್ ಅಮೀನ್, ರಾಜು ಕುಲಾಲ್, ಅಶ್ವಿನಿ ಆರ್. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ರಮ್ಯಾರಾವ್ ಉಪ್ಪೂರು ವಂದಿಸಿದರು.